
ಕೊಪ್ಪಳ ಜಿಲ್ಲೆಯ ಕುಕುನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಸೀಮೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣ ಹೊಂದಿದ ಘಟನೆ ಅತ್ಯಂತ ದುಃಖಕರ ಹಾಗೂ ಮನಕಲಕುವಂತಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ತಾಲೂಕಿನ ಕೃಷಿ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸರ್ಕಾರ ಕೃಷಿ ಹೊಂಡ ನಿರ್ಮಾಣಕ್ಕೆ ನಿಗದಿತ ನಿಯಮಗಳನ್ನು ಜಾರಿಗೊಳಿಸಿದ್ದರೂ, ಅನೇಕ ಕಡೆ ಅವುಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ವಿಶೇಷವಾಗಿ ಗ್ರಾಮೀಣ ರಸ್ತೆಗಳಿಗೆ ಅತೀ ಸಮೀಪದಲ್ಲೇ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದ್ದು, ಹೊಂಡಗಳ ಸುತ್ತ ಸುರಕ್ಷತಾ ಕಂಬಿ ಬೇಲಿ ಅಥವಾ ಎಚ್ಚರಿಕೆ ಫಲಕಗಳನ್ನು ಅಳವಡಿಸದಿರುವುದು ಜೀವಹಾನಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ತಾಲೂಕಿನಲ್ಲಿರುವ ಎಲ್ಲಾ ಕೃಷಿ ಹೊಂಡಗಳನ್ನು ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣ ಪರಿಶೀಲನೆ ನಡೆಸಿ, ರೈತರಿಗೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿಯೊಂದು ಹೊಂಡಕ್ಕೂ ಕಡ್ಡಾಯವಾಗಿ ಕಂಬಿ ಬೇಲಿ ಅಳವಡಿಸುವುದು, ಎಚ್ಚರಿಕೆ ಫಲಕ ಹಾಕುವುದು ಹಾಗೂ ನಿಯಮಾನುಸಾರ ನಿರ್ವಹಣೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಒತ್ತಾಯಿಸಲಾಗಿದೆ.ಮುಂದೆಯೂ ಇದೇ ರೀತಿಯ ಅಮೂಲ್ಯ ಜೀವಹಾನಿ ಸಂಭವಿಸಿದರೆ ಅದರ ಸಂಪೂರ್ಣ ಹೊಣೆಗಾರಿಕೆ ಸಂಬಂಧಪಟ್ಟ ಅಧಿಕಾರಿಗಳ ಮೇಲೇ ಇರುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದರೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ವಿವಿಧ ದಲಿತ ಸಂಘಟನೆಗಳ ವತಿಯಿಂದ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ವರದಿ : ಕಳಕೇಶ ಬೇವಿನಗಿಡದ, ಕುಕುನೂರು



