
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಬೆಳಗಾವಿ ಜಿಲ್ಲೆ ಮಾಜಿ ಸೈನಿಕರ ಸಂಘಟನೆಗಳ ಮಹಾಒಕ್ಕೂಟ ವಿಭಿನ್ನ ರೀತಿಯಲ್ಲಿ ಆಚರಿಸಿ ಗಮನ ಸೆಳೆಯಿತು.ನಗರದಲ್ಲಿರುವ ಮಹಾಒಕ್ಕೂಟದ ಕಾರ್ಯಾಲಯದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಭಾರತದ ಸಂವಿಧಾನದ ಪೀಠಿಕೆಯ ಪ್ರತಿಗಳನ್ನು ಹಂಚುವ ಮೂಲಕ ಅಂಬೇಡ್ಕರ್ ಅವರ ಆದರ್ಶಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡಲಾಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮಹಾಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ ಪೂಜೇರಿ ಅವರು, “ಭಾರತದ ಪ್ರತಿಯೊಬ್ಬ ಪ್ರಜೆಯೂ ತನ್ನ ಜೀವನದಲ್ಲಿ ಪಾಲಿಸಬೇಕಾದ ಅತ್ಯಮೂಲ್ಯ ಗ್ರಂಥವೇ ಸಂವಿಧಾನ. ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಬೆಳಕನ್ನು ಹರಡಿದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್.

ಅವರು ಯಾವುದೇ ಒಂದು ಜಾತಿಗೆ ಸೀಮಿತವಾಗಿರುವ ನಾಯಕರಲ್ಲ, ದೇಶದ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿರುವ ಮಹಾನ್ ವ್ಯಕ್ತಿ” ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಸುಮಾರು 200 ಸಂವಿಧಾನ ಪೀಠಿಕೆಯ ಪ್ರತಿಗಳನ್ನು ಸಾರ್ವಜನಿಕರಿಗೆ ವಿತರಿಸಿ ಅಂಬೇಡ್ಕರ್ ಜಯಂತಿಯ ಶುಭಾಶಯಗಳನ್ನು ತಿಳಿಸಲಾಯಿತು.ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಂಗಪ್ಪ ಮೇಟಿ, ಸಹ ಕಾರ್ಯದರ್ಶಿ ಸಂತೋಷ ಮಠಪತಿ, ಹಿರಿಯರಾದ ಅಶೋಕ ಮಜಗಿ, ಬಸವರಾಜ ವನ್ನೂರ, ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಪಟ್ಟಣಶೆಟ್ಟಿ, ಸದಸ್ಯರಾದ ಗೀತಾ ಗನಬಸಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಈ ವಿಭಿನ್ನ ಆಚರಣೆ ಮೂಲಕ ಅಂಬೇಡ್ಕರ್ ಅವರ ಸಂವಿಧಾನ ಮೌಲ್ಯಗಳನ್ನು ಜನಮಾನಸಕ್ಕೆ ತಲುಪಿಸುವ ಕಾರ್ಯವನ್ನು ಮಹಾಒಕ್ಕೂಟ ಯಶಸ್ವಿಯಾಗಿ ನಡೆಸಿತು.





