ಶಿವಮೊಗ್ಗ: ಭೀಕರ ಅಗ್ನಿ ಅವಘಡದಲ್ಲಿ ಡಸ್ಟರ್ ಕಾರೊಂದು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತೀರ್ಥಹಳ್ಳಿ ತಾಲೂಕಿನ ನಾಲೂರು ಕೋಳಿಗೆ ಸಮೀಪ ಇಂದು ಮಧ್ಯಾಹ್ನ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದರೂ, ಚಾಲಕ ಸಮಯಪ್ರಜ್ಞೆಯಿಂದ ಪಾರಾಗಿ ಜೀವ ಉಳಿಸಿಕೊಂಡಿದ್ದಾರೆ.

ಉಡುಪಿಯಿಂದ ಸೊರಬ ಕಡೆಗೆ ಸಾಗುತ್ತಿದ್ದ ಡಸ್ಟರ್ ಕಾರು ಆಗುಂಬೆ–ಮೇಘರವಳ್ಳಿ ಮಾರ್ಗವಾಗಿ ನಾಲೂರು ಕೋಳಿಗೆ ಹತ್ತಿರ ತಲುಪುತ್ತಿದ್ದಂತೆಯೇ, ಏಕಾಏಕಿ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಗಾಬರಿಗೊಂಡ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದು, ಕಾರು ಪಲ್ಟಿಯಾಗಿ ರಸ್ತೆ ಬದಿಯ ದರೆಬೈಲಿಗೆ ಗುದ್ದಿದೆ.ಅದಾದ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದ್ದು, ಕಣ್ಣೆದುರೇ ಹೊತ್ತಿ ಉರಿದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆ ಸಂಭವಿಸುವ ಸಮಯದಲ್ಲಿ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ತಕ್ಷಣವೇ ವಾಹನದಿಂದ ಹೊರಬಂದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.ಚಾಲಕನನ್ನು ಸೊರಬ ಮೂಲದ ಸುಹೇಲ್ ಎಂದು ಗುರುತಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಆಗಲೇ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಈ ಘಟನೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕ್ಷಣಿಕ ಅಲಕ್ಷ್ಯವೂ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಈ ಘಟನೆ ಸ್ಪಷ್ಟ ಉದಾಹರಣೆಯಾಗಿದೆ.




