
ರಾಯಚೂರು ಜಿಲ್ಲೆ ಸಿಂಧನೂರು ಲೂಕಿನ ರಾಗಳಪರ್ವಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಆವರಣದಲ್ಲಿ 1948ರಿಂದ 2025ರವರೆಗಿನ (77 ವರ್ಷಗಳ) ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ಗುರುವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕರನ್ನು ಹೂವಿನಿಂದ ಅಲಂಕರಿಸಲಾದ ಟ್ರಾಕ್ಟರ್ ಟ್ರಾಲಿಯಲ್ಲಿ ಕುಳ್ಳಿರಿಸಿ, ಡೊಳ್ಳು ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಈ ಮೆರವಣಿಗೆ ಗ್ರಾಮದಲ್ಲಿ ಹಬ್ಬದ ಸಂಭ್ರಮವನ್ನು ಮೂಡಿಸಿತು.ನಂತರ ಶಾಲಾ ಆವರಣದಲ್ಲಿ ನಡೆದ ವೇದಿಕಾ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ 60ಕ್ಕೂ ಹೆಚ್ಚು ನಿವೃತ್ತಿ ಮತ್ತು ಹಾಲಿ ಶಿಕ್ಷಕರಿಗೆ ಪಾದಪೂಜೆ ನೆರವೇರಿಸಿ ಸನ್ಮಾನಿಸಿ ಗೌರವಿಸಲಾಯಿತು.

ಗುರುಗಳ ಸೇವೆಯನ್ನು ಸ್ಮರಿಸಿ ಹಳೆಯ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದರು.ಇದರ ಜೊತೆಗೆ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಗ್ರಾಮದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಸಹ ಹಳೆಯ ವಿದ್ಯಾರ್ಥಿಗಳು ನೀಡಿದರು.

ಕಾರ್ಯಕ್ರಮವನ್ನು ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಬಸವಲಿಂಗಪ್ಪ ಉದ್ಘಾಟಿಸಿ ಮಾತನಾಡಿ, ಶಿಕ್ಷಕರನ್ನು ಈ ರೀತಿಯಾಗಿ ಗೌರವಿಸುವುದು ಇಡೀ ತಾಲೂಕಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಶ್ರೀಮತಿ ಸುವರ್ಣ ಕಟ್ಮಳ್ಳಿ ವಹಿಸಿದ್ದರು. ಒಟ್ಟಾರೆ ಈ ಕಾರ್ಯಕ್ರಮದಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಹಳೆಯ ವಿದ್ಯಾರ್ಥಿಗಳ ಬಳಗ ಸಂತೋಷ ವ್ಯಕ್ತಪಡಿಸಿತು.
ವರದಿಗಾರರು :ಚಂದ್ರಶೇಖರ್ ರಾಯಚೂರು





