
ಧಾರವಾಡ ನಗರದ ಹಾಶ್ಮಿನಗರದಲ್ಲಿ ನಡೆದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ.ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಮೂರು ದಿನಗಳ ಹಿಂದೆ ಫೈರೋಜ್ ಅವರ ನಿವಾಸದಲ್ಲೇ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 9 ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳ ವಿರುದ್ಧ ಸಮಗ್ರ ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದರು.ಪ್ರಾಥಮಿಕ ತನಿಖೆಯಲ್ಲಿ, ಮೃತ ಫೈರೋಜ್ ಮತ್ತು ಪ್ರಮುಖ ಆರೋಪಿ (ಎ1) ನಡುವಿನ ವೈಯಕ್ತಿಕ ವೈಷಮ್ಯವೇ ಕೊಲೆಗೆ ಕಾರಣವಾಗಿದೆ ಎಂಬುದು ತಿಳಿದುಬಂದಿದೆ. ಫೈರೋಜ್ ಅವರು ಕೆಲವೊಮ್ಮೆ ಕಿರಿಕಿರಿ ಮಾಡುತ್ತಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ.ಆರೋಪಿಗಳಲ್ಲಿ ಕೆಲವರಿಗೆ ಕ್ರಿಮಿನಲ್ ಹಿನ್ನೆಲೆ ಇದ್ದು, ಅವರು ಹಲವು ದಿನಗಳಿಂದ ಫೈರೋಜ್ ಅವರ ಚಲನವಲನವನ್ನು ಗಮನಿಸುತ್ತಿದ್ದರು.

ಫೈರೋಜ್ ಅವರ ಮದುವೆ ಸಮಾರಂಭ ಇರುವ ಹಿನ್ನೆಲೆ ಅವರು ಹೊರಗೆ ಹೆಚ್ಚು ಓಡಾಡುತ್ತಿದ್ದುದನ್ನು ಆರೋಪಿಗಳು ಗಮನಿಸಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಘಟನೆ ನಡೆದ ದಿನದಿಂದಲೇ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಸ್ಥಳದಲ್ಲೇ ಶಿಬಿರ ಹಾಕಿ ತನಿಖೆ ನಡೆಸುತ್ತಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಕೂಡ ಸಂಗ್ರಹಿಸಲಾಗುತ್ತಿದೆ.ಇದಲ್ಲದೆ, ಫೈರೋಜ್ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಮಹತ್ವದ ಮಾಹಿತಿ ನೀಡುತ್ತಿದ್ದಾರೆ.ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಲು ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.





