
ಶಿವಮೊಗ್ಗ: ಬೈಕ್ ಸವಾರನನ್ನು ರಕ್ಷಿಸಲು ಪ್ರಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ಶಿಕಾರಿಪುರ ಪಟ್ಟಣದ ಕುಮದ್ವತಿ ಕಾಲೇಜು ಮುಂಭಾಗ ಇಂದು ಬೆಳಗ್ಗೆ ಸಂಭವಿಸಿದೆ.ಶಿವಮೊಗ್ಗದಿಂದ ಶಿಕಾರಿಪುರದತ್ತ ತೆರಳುತ್ತಿದ್ದ ಖಾಸಗಿ ಬಸ್, ಕಾಲೇಜು ಮುಂಭಾಗದ ಹಂಪ್ ಬಳಿ ತಲುಪಿದಾಗ ಈ ದುರ್ಘಟನೆ ನಡೆದಿದೆ.

ಬಸ್ಸಿನ ಮುಂಭಾಗದಲ್ಲಿ ಸಾಗುತ್ತಿದ್ದ ಬೈಕ್ ಸವಾರನು ಹಂಪ್ ತಪ್ಪಿಸಲು ಹಠಾತ್ತಾಗಿ ಬೈಕ್ನ್ನು ಬಲಕ್ಕೆ ತಿರುಗಿಸಿದ್ದಾನೆ. ಇದರಿಂದ ಡಿಕ್ಕಿ ತಪ್ಪಿಸಲು ಬಸ್ ಚಾಲಕ ಎಡಕ್ಕೆ ತಿರುಗಿಸಿದ್ದಾನೆ.ಆದರೆ, ಕ್ಷಣಾರ್ಧದಲ್ಲೇ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಹಿನ್ನೆಲೆಯಲ್ಲಿ, ಆತನನ್ನು ರಕ್ಷಿಸಲು ಚಾಲಕ ಬಸ್ಸನ್ನು ಪುನಃ ಬಲಕ್ಕೆ ತಿರುಗಿಸಿದ್ದಾನೆ.
ಈ ವೇಳೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಅಪಘಾತದಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ಹಾಗೂ ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ.ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಘಟನಾ ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.





