
ಶಿವಮೊಗ್ಗ : ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ವಿನೋದ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸಾಮಗ್ರಿಗಳನ್ನು ಇಳಿಸುವ ವೇಳೆ ಕೇಬಲ್ ತುಂಡಾಗಿ ಕಬ್ಬಿಣದ ಸ್ಲ್ಯಾಬ್ಗಳು ಅಚಾನಕ್ ಕೆಳಗೆ ಬೀಳುತ್ತಿದ್ದಾಗ, ತಪ್ಪಿಸಿಕೊಳ್ಳಲು ಯತ್ನಿಸಿದ ವಿನೋದ್ ಕುಮಾರ್ ತೀವ್ರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಕಾರ್ಮಿಕರ ಹಕ್ಕುಗಳಿಗಾಗಿ ಸದಾ ಹೋರಾಟ ನಡೆಸುತ್ತಿದ್ದ ಅವರು, ತಮ್ಮ ಸೇವೆಗಳಿಂದ ಕಾರ್ಮಿಕ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಅವರ ಅಗಲಿಕೆ ಸಹೋದ್ಯೋಗಿಗಳು ಹಾಗೂ ಸಾರ್ವಜನಿಕರಲ್ಲಿ ದುಃಖದ ವಾತಾವರಣ ನಿರ್ಮಿಸಿದೆ.ಘಟನೆ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.



